ಹುಬ್ಬಳ್ಳಿ: ಮಳೆ ಕೊರತೆಯಿಂದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಪ್ರತಿ ಹೆಕ್ಟೇರ್ಗೆ ₹25 ಸಾವಿರ ಬರ ಪರಿಹಾರ ನೀಡಬೇಕು ಎಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಬರಗಾಲ ಮತ್ತು ರೈತರ ಸಮಸ್ಯೆಗಳ ಕುರಿತು ಎಲ್ಲ ಪಕ್ಷಗಳ ಶಾಸಕರು ಗಂಭೀರವಾಗಿ ಚರ್ಚೆ ನಡೆಸಬೇಕು ಎಂದರು.
ವಿರೋಧ ಪಕ್ಷದವರು ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಆದರೆ, ಈ ವಿಚಾರದಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಸದನದಲ್ಲಿ ಸಾರ್ವಜನಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಧ್ವನಿ ಎತ್ತಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಗಮನ ಸೆಳೆದರೆ ರೈತರಿಗೆ ಅನುಕೂಲವಾಗಲಿದೆ ಎಂದರು.
28 ರೈತರ ವಿರುದ್ಧ ಪ್ರಕರಣ: ಆಕ್ರೋಶ
2025ರ ಡಿಸೆಂಬರ್ನಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಕೋರಮಂಗಲದಲ್ಲಿರುವ ಪರಿಸರ ಭವನದ ಎದುರು ರೈತ ಸೇನಾ ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಎಲ್ಲ ಇಲಾಖೆಗಳ ಅನುಮತಿ ಪಡೆದುಕೊಂಡು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರೂ, ಎಂಟು ತಿಂಗಳ ಬಳಿಕ ರೈತರಿಗೆ ನೋಟಿಸ್ ನೀಡಿ ಪ್ರಕರಣ ದಾಖಲಿಸಲಾಗಿದೆ ಎಂದು ವೀರೇಶ ಸೊಬರದಮಠ ಆರೋಪಿಸಿದರು.
ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಹಾಗೂ ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ ಎಂದು ಆರೋಪಿಸಿ 28 ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಈ ಕ್ರಮವನ್ನು ರೈತ ಸೇನಾ ಕರ್ನಾಟಕ ಖಂಡಿಸುತ್ತದೆ ಎಂದರು.
ಸರ್ಕಾರ ಕೂಡಲೇ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಅಲ್ಲದೇ ಮಡಿವಾಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸೇನಾ ಕರ್ನಾಟಕದ ಮುಖಂಡರಾದ ಗುರು ರಾಯನಗೌಡ್ರ, ಮಲ್ಲಣ್ಣ ಆಲೇಕಾರ ಹಾಗೂ ವಿರುಪಾಕ್ಷ ರಾಯಣ್ಣನವರ ಉಪಸ್ಥಿತರಿದ್ದರು.


