ಹುಬ್ಬಳ್ಳಿ: ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಈವರೆಗೆ ಒಂದೇ ಪೊಲೀಸ್ ಉಪವಿಭಾಗವಿತ್ತು. ಇದೀಗ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಉಪವಿಭಾಗವನ್ನು ಹೊಸದಾಗಿ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು.
ಗದಗ ರಸ್ತೆಯಲ್ಲಿರುವ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನೂತನ ಡಿವೈಎಸ್ಪಿ ಕಚೇರಿಯನ್ನು ಶನಿವಾರ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ಹಾಗೂ ಗುಡಗೇರಿ ಪೊಲೀಸ್ ಠಾಣೆಗಳು ನೂತನ ಉಪವಿಭಾಗದ ವ್ಯಾಪ್ತಿಗೆ ಬರಲಿವೆ. ಧಾರವಾಡ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಕಲಘಟಗಿ, ಧಾರವಾಡ ಗ್ರಾಮೀಣ ಹಾಗೂ ಗರಗ ಠಾಣೆಗಳು ಮುಂದುವರಿಯಲಿವೆ ಎಂದರು.
ಆಡಳಿತ ವಿಕೇಂದ್ರೀಕರಣದಿಂದ ಜನರಿಗೆ ಶೀಘ್ರ ಪೊಲೀಸ್ ಸೇವೆ ದೊರೆಯಲಿದೆ. ಗುಡಗೇರಿ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಧಾರವಾಡಕ್ಕೆ ತೆರಳುವ ಅಗತ್ಯವಿಲ್ಲ. ಹುಬ್ಬಳ್ಳಿಯ ನೂತನ ಉಪವಿಭಾಗ ಕಚೇರಿಯಲ್ಲೇ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.
ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ
ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಟ್ಕಾ, ಜೂಜಾಟ, ಗಾಂಜಾ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಸಂಘಟಿತ ಅಪರಾಧಗಳ ವಿರುದ್ಧ ಪ್ರತಿ ವಾರ ಸುಮಾರು 20ರಿಂದ 25 ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಗುಂಜನ್ ಆರ್ಯ ತಿಳಿಸಿದರು.
ಈದ್ ಮಿಲಾದ್ಗೆ ಪೊಲೀಸ್ ಬಂದೋಬಸ್ತ್
ಆಗಸ್ಟ್ 26ರಂದು ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ವಿವಿಧ ತಾಲೂಕು ಹಾಗೂ ಪೊಲೀಸ್ ಠಾಣೆಗಳ ಮುಖಂಡರು ಡಿಜೆ ಬಳಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಈದ್ ಮಿಲಾದ್ ಬಂದೋಬಸ್ತ್ಗಾಗಿ ಎರಡು ಕೆಎಸ್ಆರ್ಪಿ ತುಕಡಿಗಳನ್ನು ಹೆಚ್ಚುವರಿಯಾಗಿ ಜಿಲ್ಲೆಗೆ ಕರೆಸಿಕೊಳ್ಳಲಾಗುವುದು ಎಂದು ಎಸ್ಪಿ ಹೇಳಿದರು.
ಗಣೇಶೋತ್ಸವಕ್ಕೆ ಏಕಗವಾಕ್ಷಿ ಮೂಲಕ ಅನುಮತಿ
ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಗಣೇಶೋತ್ಸವ ಆಯೋಜಕರು ಏಕಗವಾಕ್ಷಿ ವ್ಯವಸ್ಥೆ ಮೂಲಕ ಅಗತ್ಯ ಅನುಮತಿಗಳನ್ನು ಪಡೆಯಬಹುದು.
ಸುಪ್ರೀಂ ಕೋರ್ಟ್ ಆದೇಶ ಹಾಗೂ ನಿಯಮಾವಳಿಗಳ ಪ್ರಕಾರ ರಾತ್ರಿ 10 ಗಂಟೆಯವರೆಗೆ ಡಿಜೆ ಬಳಕೆಗೆ ಅನುಮತಿ ನೀಡಲಾಗುವುದು ಎಂದು ಗುಂಜನ್ ಆರ್ಯ ತಿಳಿಸಿದರು.
ನೂತನ ಡಿವೈಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಶಿವಾನಂದ ಕಟಗಿ ಅವರಿಗೆ ಎಸ್ಪಿ ಗುಂಜನ್ ಆರ್ಯ ಹೂಗುಚ್ಛ ನೀಡಿ ಶುಭಕೋರಿದರು. ಪೊಲೀಸ್ ಇನ್ಸ್ಪೆಕ್ಟರ್ಗಳಾದ ಮುರುಗೇಶ ಚೆನ್ನಣ್ಣವರ, ಸಮೀರ ಮುಲ್ಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


